ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ
ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಒದಗಿಸುವ ಜೊತೆಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ ಹಾಜರಾತಿ ಸಮರ್ಪಕ ನಿರ್ವಹಣೆ ಮಾಡುವ ಮೂಲಕ ಅವರನ್ನು ಮುಖ್ಯ ವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್. ಮಂಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳವಾಡಿಯಲ್ಲಿ ವಾಸವಾಗಿರುವ ರಿಜ್ವಾನ್ ಎಂಬ ವಿದ್ಯಾರ್ಥಿ ಪೋಷಕರು ವರ್ಗಾವಣೆ ನೀಡದಿರುವ ಕುರಿತು ಮಕ್ಕಳ ರಕ್ಷಣಾ ಆಯೋಗಕ್ಕೆ ದೂರು ನೀಡಿರುತ್ತಾರೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದು ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶಾಲೆಯನ್ನು ಸಂಪರ್ಕಿಸಿ ವರ್ಗಾವಣೆ ಪತ್ರ ಕೊಡಲು ತಿಳಿಸುವಂತೆ ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ, ಬಿಸಿ ಊಟ ಯೋಜನೆಯಡಿ ಪೌಷ್ಟಿಕ ಆಹಾರ ಪೂರೈಕೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದ ಅವರು ಮಕ್ಕಳಿಗೆ ಮೂಲ ಸೌಕರ್ಯಗಳನ್ನು ಆದ್ಯತೆ ಮೇಲೆ ಒದಗಿಸಬೇಕು. ಮಕ್ಕಳ ಅನುಕೂಲಕ್ಕಾಗಿ ೧೦೯೮ ಹಾಗೂ ೧೧೨ ಸಹಾಯವಾಣಿಗಳ ಸೂಕ್ತ ಮಾಹಿತಿ ಹಾಗೂ ಅರಿವು ಮೂಡಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಆಯಾಯ ವಸತಿ ಶಾಲೆಗಳ ಹಾಗೂ ಶಾಲೆಗಳ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ, ಶಾಲಾ ನಿರ್ವಹಣಾ ಸಮಿತಿಗಳನ್ನು ರಚಿಸಿಕೊಂಡು ಮಕ್ಕಳ ನೋವಿಗೆ ಸ್ಪಂಧಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಕ್ಲಬ್ ರಚಿಸಬೇಕು. ಆಪ್ತ ಸಮಾಲೋಚನೆಗೆ ಶಿಕ್ಷಕರನ್ನು ನೇಮಿಸಬೇಕು, ಸಂಬಂಧಪಟ್ಟ ಅಧಿಕಾರಿಗಳು ನಿರಂತರವಾಗಿ ಭೇಟಿ ನೀಡಿ ಎಲ್ಲಾ ಸೌಲಭ್ಯಗಳನ್ನು ಆದ್ಯತೆ ಮೇಲೆ ನೀಡುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ಪದ್ಧತಿಗಳನ್ನು ಸಂಪೂರ್ಣ ತೊಡೆದು ಹಾಕಲು ಸಂಬಂಧಿಸಿದ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಕಾರ್ಮಿಕ ಇಲಾಖೆ ಅಧಿಕಾರಿಗಳು, ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಸಮಿತಿ ರಚಿಸಿಕೊಂಡು. ವಿವಿಧ ಉದ್ದಿಮೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಬಾಲ ಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚ ಬೇಕು. ಅಂತಹ ಸ್ಥಳದಲ್ಲಿ ಮಕ್ಕಳು ಕಂಡು ಬಂದಲ್ಲಿ. ಸಂಬಂಧಿಸಿದವರ ಲೈಸೆನ್ಸ್ ರದ್ದು ಪಡಿಸುವಂತೆ ಸೂಚಿಸಿದರು.
ಬಾಲ್ಯ ವಿವಾಹವಾಗಿ ಗರ್ಭಿಣಿಯಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ತಕ್ಷಣ ಪತ್ತೆ ಹಚ್ಚಿ ಕಾನೂನು ರೀತ್ಯಾ ಪ್ರಕರಣ ದಾಖಲಿಸಬೇಕು. ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಮಕ್ಕಳ ಆರೋಗ್ಯ ಮತ್ತು ಅಪೌಷ್ಟಿಕ ನಿರ್ವಹಣೆಗೆ ವಿಶೇಷ ಗಮನ ನೀಡಬೇಕು. ಪೋಕ್ಸೋ ಕಾಯಿದೆಯಡಿ ದಾಖಲಾಗುವ ಪ್ರಕರಣಗಳಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
District Level Child Protection Committee Meeting