ಅರಣ್ಯ-ಕಾಡುಪ್ರಾಣಿಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ
ಚಿಕ್ಕಮಗಳೂರು: ಅರಣ್ಯ ಮತ್ತು ಕಾಡುಪ್ರಾಣಿಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಹೇಳಿದರು.
ಅರಣ್ಯ ಇಲಾಖೆ ವತಿಯಿಂದ ಸೋಮವಾರ ನಗರದ ಶ್ರೀನಿವಾಸನಗರದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅರಣ್ಯ ನಾಶದ ಪರಿಣಾಮ ಇಂದು ಮಳೆ ಇಲ್ಲದೆ ಬರದ ಪರಿಸ್ಥಿತಿ ಎದುರಾಗಿದೆ. ಪ್ರಕೃತಿ ಅವಘಡಗಳು ಹವಾಮಾನ ವೈಪರೀತ್ಯಗಳು ಉಂಟಾಗುತ್ತಿವೆ. ಇದನ್ನು ಸಾರ್ವಜನಿಕರು ಅರಿಯಬೇಕು. ಅರಣ್ಯ ರಕ್ಷಣೆ ಮತ್ತು ಕಾಡು ಪ್ರಾಣಿಗಳ ರಕ್ಷಣೆಯ ಹೊಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳಿಗಷ್ಟೇ ಬಿಡದೆ. ಅವರೊಂದಿಗೆ ಸಾರ್ವಜನಿಕರೂ ಕೂಡ ಕೈಜೋಡಿಸಬೇಕು. ಹಾಗಾದಾಗ ಮಾತ್ರ. ಅರಣ್ಯ ಮತ್ತು ಕಾಡುಪ್ರಾಣಿಗಳು. ಮುಂದಿನ ಪೀಳಿಗೆಗೆ ಉಳಿಯುತ್ತವೆ ಎಂದರು.
ಪ್ರಸ್ತುತ ದೇಶದಲ್ಲಿ ಶೇಕಡ ೨೪ರಷ್ಟು ಅರಣ್ಯವಿದೆ. ಅದು ಇನ್ನೂ ಹೆಚ್ಚಬೇಕಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅರಣ್ಯ ಮತ್ತು ಕಾಡು ಪ್ರಾಣಿಗಳ ರಕ್ಷಣೆಗಾಗಿ ಅನೇಕ ಕಾಯಿದೆ ಮತ್ತು ಕಾನೂನುಗಳನ್ನು ಜಾರಿಗೆ ತಂದಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜೀವವನ್ನು ಬಿಗಿಹಿಡಿದು ಕೆಲಸ ಮಾಡುವ ಪರಿಸ್ಥಿತಿ ಇದೆ. ಈಗಾಗಲೇ ಸಾಕಷ್ಟು ಅಧಿಕಾರಿಗಳು ಸಿಬ್ಬಂದಿಗಳು ಪ್ರಾಣತ್ಯಾಗ ಮಾಡಿದ್ದಾರೆ ಎಂದು ವಿಷಾದಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರವಾಸ್ ಸಿಂಗ್ ಇತ್ತೀಚಿನ ವರ್ಷಗಳಲ್ಲಿ ಮಳೆ ಏರುಪೇರು ಆಗುತ್ತಿರುವುದಕ್ಕೆ ಹಾಗೂ ಕಡಿಮೆಯಾಗುತ್ತಿರುವುದಕ್ಕೆ. ಕಾಡು ಪ್ರಾಣಿಗಳು ನಾಡಿಗೆ ಬರುತ್ತಿರುವುದಕ್ಕೆ, ಉತ್ತರಖಂಡ ಹಿಮಾಚಲ ಪ್ರದೇಶ ಸೇರಿದಂತೆ ಪ್ರಕೃತಿ ಅವಘಡಗಳು ಸಂಭವಿಸುತ್ತಿರುವುದಕ್ಕೆ ಮೂಲ ಕಾರಣ ಅರಣ್ಯ ನಾಶ ಎಂದರು. ದೇಶದಲ್ಲಿ ನಿಗದಿತ ಪ್ರಮಾಣದಲ್ಲಿ ಅರಣ್ಯವಿದ್ದಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದ ಅವರು. ಅರಣ್ಯ ಇಲಾಖೆ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಅರಣ್ಯ ರಕ್ಷಣೆಯನ್ನು ಯುದ್ಧೋಪಾದಿಯಲ್ಲಿ ಮಾಡಬೇಕು ಹೇಳಿದರು.
ಅರಣ್ಯ ಸಂರಕ್ಷಣೆಗಾಗಿ ಹುತಾತ್ಮರಾದ ೫೯ ಅರಣ್ಯ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕ ರೆಡ್ಡಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು
National Forest Martyrs Day was celebrated in Srinivasanagar on Monday