September 16, 2024

ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು

0
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಸಮಾರಂಭ

ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಸಮಾರಂಭ

ಚಿಕ್ಕಮಗಳೂರು:  ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು, ಗ್ರಾಹಕರ ಹಿತಾಸಕ್ತಿ ಕಾಯಲು ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದ್ದು, ಪ್ರತಿಯೊಬ್ಬರು ಕಾನೂನು ತಿಳಿದುಕೊಳ್ಳುವುದು ಬಹಳ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್ ಅವರು ಹೇಳಿದರು.

ಟಿ.ಎಂ.ಎಸ್ ಸವೂರ್ ಹಾಲ್‌ನಲ್ಲಿ ಇಂದು ಜಿಲ್ಲಾಡಳಿತ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮತ್ತಿತರ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ಗ್ರಾಹಕ ಸಮಸ್ಯೆಗಳ ಹಾಗೂ ಹಕ್ಕುಗಳ ಕುರಿತ ವಿವಿಧ ಇಲಾಖೆಗಳು ಮತ್ತು ಗ್ರಾಹಕರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಿಸೆಂಬರ್ ೨೪ ಅನ್ನು ಭಾರತದಲ್ಲಿ ರಾಷ್ಟ್ರೀಯ ಗ್ರಾಹಕರ ದಿನವನ್ನಾಗಿ ಆಚರಿಸಲಾಗುತ್ತದೆ. ಗ್ರಾಹಕರಿಗೆ ತಮ್ಮ ಹಕ್ಕುಗಳ ಅರಿವಿನ ಮಹತ್ವವನ್ನು ಮನವರಿಕೆ ಮಾಡಿಕೊಡುವ ಹಾಗೂ ಇತರರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಗ್ರಾಹಕ ದಿನ ಆಚರಿಸಲಾಗುತ್ತದೆ ಎಂದರು.

ತಾವು ಖರೀದಿಸಲಾದ ವಸ್ತು ಹಾಗೂ ಅದರ ಸೇವೆಗಳ ಗುಣಮಟ್ಟವಾಗಿದೆಯೋ, ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ತಪ್ಪದೆ ಖರೀದಿಸಲಾದ ವಸ್ತುವಿನ ಬಿಲ್‌ನ್ನು ಕಡ್ಡಾಯವಾಗಿ ಪಡೆಯಬೇಕು. ಮೋಸ ಮಾಡುವವರು ತುಂಬಾ ಚಾಣಾಕ್ಷ ನಡೆ ಅನುಸರಿಸುತ್ತಾರೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರು ಸುಶಿಕ್ಷಿತರಾಗಿರಬೇಕು ಅದರಲ್ಲೂ ತಂತ್ರಜ್ಞಾನ ತಿಳಿದುಕೊಳ್ಳಬೇಕು. ಸಾರ್ವಜನಿಕರು ಮಾರುಕಟ್ಟೆಯಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವಾಗ ಎಚ್ಚರವಹಿಸುವುದು ಅತ್ಯವಶ್ಯಕವಾಗಿದೆ. ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತುಗಳ ಖರೀದಿ ಕಲಬೆರಿಕೆ ಬಗ್ಗೆ ಎಚ್ಚರ ವಹಿಸಲು ಸಾಧ್ಯ ಎಂದು ಹೇಳಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಡಾ. ಮಂಜುನಾಥ್ ಎಂ. ಬಮ್ಮನಕಟ್ಟಿ ಅವರು ಮಾತನಾಡಿ ಸಮಾಜದಲ್ಲಿ ಒಬ್ಬರನ್ನೊಬ್ಬರು ಅವಲಂಬಿಸಿರುವುದರಿಂದ ದಿನನಿತ್ಯ ಜೀವನಕ್ಕೆ ಅಗತ್ಯವಾದ ವಸ್ತುಗಳನ್ನು ಖರೀದಿಸುವಾಗ ನಡೆಯುವ ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಲು ಜಾಗೃತವಾಗಿರಬೇಕು ಎಂದ ಅವರು ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು.

ಗ್ರಾಹಕರು ಎಷ್ಟೇ ಜಾಗೃತರಾಗಿದ್ದರು ಒಂದೊಮ್ಮೆ ಮೋಸ ಹೋಗುವುದು ಸಹಜ ಇಂತಹ ಸಂದರ್ಭದಲ್ಲಿ ಮೋಸ ಹೋದ ಯಾವುದೇ ಗ್ರಾಹಕನು ತನಗಾದ ನಷ್ಟವನ್ನು ಹಿಂಪಡೆಯಲು ಗ್ರಾಹಕ ವೇದಿಕೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಬಹುದು.

ಗ್ರಾಹಕರಿಗೆ ಸುರಕ್ಷತೆಯ ಹಕ್ಕನ್ನು ನೀಡಲಾಗಿದೆ. ಅವರು ಖರೀದಿಸುವ ಯಾವುದೇ ವಸ್ತು, ಸರಕು, ಅಥವಾ ಪಡೆಯುವ ಸೇವೆಯು ಸುರಕ್ಷಿತವಾಗಿರಬೇಕೆಂದು ಈ ಹಕ್ಕು ಹೇಳುತ್ತದೆ. ಸುರಕ್ಷತೆಯ ಹಕ್ಕನ್ನು ಕೇವಲ ಗ್ರಾಹಕ ಸಂರಕ್ಷಣಾ ಕಾಯ್ದೆ ಮಾತ್ರವಲ್ಲ ಇನ್ನೂ ಅನೇಕ ಕಾನೂನುಗಳಲ್ಲಿ ಅವಕಾಶ ನೀಡಲಾಗಿದ್ದು, ದೀರ್ಘ ಬಾಳಿಕೆಯ ವಸ್ತುಗಳು, ಔಷಧ, ಸೌಂದರ್ಯವರ್ಧಕ, ಆಹಾರ, ಪಾನೀಯ ಎಲ್ಲವು ಗ್ರಾಹಕರಿಗೆ ಸುರಕ್ಷಿತವಾಗಿರಬೇಕು ಎಂದು ಹೇಳಿದರು.

ವಕೀಲರಾದ ಡಿ.ಬಿ ಸುಜೇಂದ್ರ ಅವರು ಗ್ರಾಹಕರ ಹಕ್ಕು ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು ಗ್ರಾಹಕರಿಗೆ ಅನಗತ್ಯವಾಗಿ ವಂಚಿಸುವ ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯವಹಾರ ಹಾಗೂ ಆನ್ ಲೈನ್‌ನಲ್ಲಿ ಖರೀದಿಸುವ ಗ್ರಾಹಕರಿಗೆ ಎಷ್ಟು ಅನುಕೂಲವೋ ಅಷ್ಟೇ ವಂಚನೆ ಪ್ರಕರಣಗಳು ಕೂಡ ಹೆಚ್ಚು ಈ ಬಗ್ಗೆ ಗ್ರಾಹಕರು ಎಚ್ಚರಿಕೆಯಿಂದ ವ್ಯವಹಾರ ಮಾಡುವುದರ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಬಹಳ ಮುಖ್ಯ ಎಂದು ಹೇಳಿದರು.

ಕಾರ್ಯಾಧ್ಯಕ್ಷ ವೈ.ಎಸ್. ಸಿದ್ದಯ್ಯ, ಶಾರದ ಸ್ಕೂಲ್ ಆಫ್ ಲಾ ಪ್ರೊಫೆಸರ್ ಹೆಚ್.ಎನ್. ಮಾನಸ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಶ್ರೀನಿವಾಸ ಎಂ.ಹೆಚ್., ಗ್ರಾಹಕರ ವ್ಯಾಜ್ಯಗಳ ಆಯೋಗದ ರೀಜಿಸ್ಟಾರ್ ಇಂದುಮತಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎನ್.ಆರ್. ಚನ್ನಕೇಶವ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಎ.ಬಿ. ಸಂಜಯ್ ಸ್ವಾಗತಿಸಿ ವಂದಿಸಿದರು. ಟಿ. ಎಂ. ಎಸ್ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು

National Consumer Day Celebration

About Author

Leave a Reply

Your email address will not be published. Required fields are marked *