ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷ ಸವಿತಾ ಮಹರ್ಷಿ
ಚಿಕ್ಕಮಗಳೂರು: ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷ ಎಂದು ಖ್ಯಾತರಾದ ಸವಿತಾ ಮಹರ್ಷಿಗಳ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಚಿಕ್ಕಮಗಳೂರು ತಾಲ್ಲೂಕು ತಹಸೀಲ್ದಾರ್ ಡಾ. ಸುಮಂತ್ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸವಿತಾ ಮಹರ್ಷಿಗಳು ಸಮಾಜ ಮುಖಿಯಾಗಿ ಬೆಳೆದು ಇತರರಿಗೆ ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳನ್ನು ಇಂದಿನ ಜನತೆ ಆಳವಡಿಸಿಕೊಂಡು ನಡೆಯಲು ಬೆಳಕು ತೋರಿಸಿದೆ ಎಂದರು.
ಸವಿತಾ ಸಮಾಜವು ಅತೀಕಡಿಮೆ ಜನಸಂಖ್ಯೆ ಹೊಂದಿರುವ ವರ್ಗದವರಾಗಿದ್ದು, ಇವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಸರ್ಕಾರದ ಉದ್ದೇಶವಾಗಿದೆ ಈ ವರ್ಗದವರಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡಿದ್ದು, ಈ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ತಿಳಿಸಿದರು.
ಸಾಹಿತಿ ಚಟ್ನಳ್ಳಿ ಮಹೇಶ್ ಸವಿತಾ ಮಹರ್ಷಿ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಿದವರು ಮಹಾಪುರುಷರು, ಕಾಯಕದಲ್ಲಿ ಮೇಲು ಕೀಳೆಂಬುದಿಲ್ಲ ಅದು ತನ್ನದೇ ಆದ ಶ್ರೇಷ್ಠತೆಯನ್ನು ಹೊಂದಿದೆ. ಕಾಯಕ ಹೀನನಾದರೆ ಬದುಕಿಗೆ ಅರ್ಥವಿರುವುದಿಲ್ಲ ಪ್ರತಿಯೊಬ್ಬರಿಗೂ ತಾವು ಮಾಡುವ ವೃತ್ತಿಯ ಬಗ್ಗೆ ಗೌರವವಿರಬೇಕು ಎಂದ ಅವರು. ಸವಿತಾ ಸಮಾಜವು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ತನ್ನದೇ ಆದ ಕೊಡುಗೆ ನೀಡಿದೆ ಎಂದರು.
ಸವಿತಾ ಮಹರ್ಷಿಗಳು ಸಮಾಜದ ವ್ಯಕ್ತಿಯ ನಾಡಿ ಮಿಡಿತ ಗ್ರಹಿಸುವ ಶಕ್ತಿ ಹೊಂದಿದ್ದರು. ಪ್ರತಿಯೊಬ್ಬರು ತಮ್ಮ ವೃತ್ತಿಯನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ಮಾಡುವ ಮೂಲಕ ಜನ ಪ್ರೀತಿಗೆ ಪಾತ್ರರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಉಪವಿಭಾಗಾಧಿಕಾರಿಗಳ ಕಛೇರಿಯ ಉಪ ತಹಸೀಲ್ದಾರ್ ಶಾರದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ರಮೇಶ್ ಹಾಗೂ ಸವಿತಾ ಸಮಾಜದ ಮುಖಂಡರು ಉಪಸ್ಥಿತರಿದ್ದರು.
Savita Maharshi Jayanti programme