September 19, 2024

ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ

0
ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆ

ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆ

ಚಿಕ್ಕಮಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಬೇಕು. ನಗರ ಪ್ರದೇಶದ ಪ್ರತಿ ವಾರ್ಡ್‌ಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಂಗಿಂಗ್ ಮಾಡುವಂತೆ ನಗರ ಸಭೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ ಅವರು ಪ್ರತಿ ಮನೆಗಳಲ್ಲಿ ಲಾರ್ವಾ ಸಮೀಕ್ಷೆ ನಡೆಸುವಂತೆ ಹೇಳಿದ ಅವರು ಜನರು ಆತಂಕ ಪಡಬೇಕಾಗಿಲ್ಲ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಡೆಂಗ್ಯೂ ಜ್ವರ ಹರಡುವುದನ್ನು ತಪ್ಪಿಸಬಹುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥಬಾಬು ಮಾತನಾಡಿ ಮಳೆಗಾಲದ ಆರಂಭದ ಸಮಯದಲ್ಲಿ ಅಂದರೆ ಜೂನ್, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯವಾಗಿ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತದೆ. ಈ ಅವಧಿಯಲ್ಲಿ ವೈರಲ್ ಜ್ವರವು ಹೆಚ್ಚಾಗಿ ಕಂಡುಬರುತ್ತದೆ. ಎಲ್ಲಾ ಜ್ವರ ಡೆಂಗ್ಯೂ ಆಗಿರುವುದಿಲ್ಲ ಈಡೀಸ್ ಈಜಿಪ್ಟ್ ಎಂಬ ಸೊಳ್ಳೆಯಿಂದ ಡೆಂಗ್ಯೂ ಹರಡುತ್ತದೆ. ಈ ಸೊಳ್ಳೆಗಳು ಸ್ವಚ್ಛವಾದ ನೀರನ್ನೆ ಅವಾಸ ಸ್ಥಾನವನ್ನಾಗಿ ಮಾಡಿಕೊಂಡಿರುತ್ತವೆ. ನೀರಿನಲ್ಲಿ ಮೊಟ್ಟೆ ಇಟ್ಟು ೮ ರಿಂದ ೧೧ ದಿನಗಳಲ್ಲಿ ಸೊಳ್ಳೆ ಹೊರ ಬರುತ್ತದೆ. ಹಗಲು ಹೊತ್ತಿನಲ್ಲೇ ಇವು ಮನುಷ್ಯರನ್ನು ಕಚ್ಚುತ್ತವೆ ಎಂದರು.
ಎಚ್ಚರಿಕೆ ಅಗತ್ಯ : ಡೆಂಗ್ಯೂ ಹರಡುವುದಕ್ಕೂ ಮೊದಲೇ ಜನರು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಳ್ಳುವುದು ಅತಿ ಮುಖ್ಯ. ಹೆಚ್ಚು ದಿನಗಳ ಕಾಲ ನೀರನ್ನು ಶೇಖರಿಸಿಡುವುದನ್ನು ತಪ್ಪಿಸಬೇಕು.
ಸಿಮೆಂಟ್ ತೊಟ್ಟಿ ನೀರು ತುಂಬಿಸುವ ಪಾತ್ರೆಗಳನ್ನು ನೀರು ತುಂಬಿಸುವ ಪೂರ್ವದಲ್ಲಿ ಚೆನ್ನಾಗಿ ತೊಳೆದು ಸರಿಯಾಗಿ ಮುಚ್ಚುಳ ಮುಚ್ಚುವ ಮೂಲಕ ಸೊಳ್ಳೆ ನಿಯಂತ್ರಣವನ್ನು ಕೈಗೊಳ್ಳಬೇಕು. ಘನ ತ್ಯಾಜ್ಯಗಳಾದ ಟೈಯರ್, ಎಳನೀರು ಚಿಪ್ಪು, ಒಡೆದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಅನುಪಯುಕ್ತ ವಸ್ತು ಇವುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಯ ಸುತ್ತಮುತ್ತಲಿನ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ರೋಗವಾಹಕ ಆಶ್ರಿತ ನಿಯಂತ್ರಣಾಧಿಕಾರಿ ಡಾ. ಬಾಲಕೃಷ್ಣ, ಜಿಲ್ಲಾ ಆರ್‌ಸಿಹೆಚ್ ಡಾ. ಮಂಜುನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಭರತ್ ಕುಮಾರ್ ಚಿಕ್ಕಮಗಳೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಸೀಮಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಹರೀಶ್ ಬಾಬು, ನಗರಸಭೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು
Create awareness for dengue control in the district

About Author

Leave a Reply

Your email address will not be published. Required fields are marked *

You may have missed