September 7, 2024

ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ಸೂಚನೆ

0
ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಕೆಸ್ವಾನ್‌ನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ಸಮಾಲೋಚನೆ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಕೆಸ್ವಾನ್‌ನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ಸಮಾಲೋಚನೆ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿರುವ ಕೆಸ್ವಾನ್‌ನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ಸಮಾಲೋಚನೆ ನಡೆಸಿ ಮಾತನಾಡಿದ ಅವರು ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸಲಹೆ ನೀಡಿದರು.

ಮಳೆಯಿಂದ ಆಗಿರುವ ಹಾನಿಯ ಕುರಿತು ಕೆಳಮಟ್ಟದ ಅಧಿಕಾರಿಗಳು ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಮನೆಗಳ ಹಾನಿ, ರಸ್ತೆಗಳ ಹಾನಿ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸರ್ಕಾರದ ನಿಯಮಗಳ ಪ್ರಕಾರ ನೊಂದ ಜನರಿಗೆ ಸಕಾಲದಲ್ಲಿ ಪರಿಹಾರ ನೀಡುವಂತೆ ಹೇಳಿದರು.

ಜನ ಜಾನುವಾರು ಮತ್ತಿತರ ಸಮಸ್ಯೆಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿ ಕೆಲಸ ಮಾಡಬೇಕು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕಲ್ಲದೆ ಜಿಲ್ಲೆಯ ಜನರ ಸುರಕ್ಷತೆಗೆ ಒತ್ತು ನೀಡುವಂತೆ ತಿಳಿಸಿದ ಅವರು ಪ್ರವಾಹದ ನಂತರದ ಪರಿಣಾಮಗಳನ್ನು ನಿರ್ವಹಿಸಲು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕಲ್ಲದೆ ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಜಿಲ್ಲೆಗೆ ಪ್ರವಾಸಿಗರು ಆಗಮಿಸದಂತೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆಯಲ್ಲದೇ ಪ್ರವಾಸಿಗರು ಯಾವುದೇ ಚಾರಣವನ್ನು ಕೈಗೊಳ್ಳದಂತೆ ಮಾಹಿತಿ ನೀಡಲಾಗಿದೆ.

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿಗೆ ಹೋಗುವ ರಸ್ತೆ ಹಾನಿಯಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ಮಳೆ ಕಡಿಮೆಯಾಗುವವರೆಗೂ ಜುಲೈ ೨೨ ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮಳೆಯಿಂದ ಗುಡ್ಡ ಕುಸಿತ, ಮರಗಳು ಬೀಳುತ್ತಿದ್ದು, ಗುಡ್ಡ ಕುಸಿತ, ಮರಗಳು ಬಿದ್ದ ಕಡೆ ತಕ್ಷಣ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಬಾರಿ ಮಳೆಯಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಯಾವುದೇ ರೀತಿಯ ಸಾಂಕ್ರಾಮಿಕ ರೋಗ ಹರಡದಂತೆ ಜನರಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅರಿವು ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮ್ಟೆ ಮಾಹಿತಿ ನೀಡಿ ಹಾಸನ ಜಿಲ್ಲೆಯ ಸಂಪಾಜೆ ರಸ್ತೆಯ ಗುಡ್ಡ ಕುಸಿತದಿಂದಾಗಿ ಆ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿರುವುದರಿಂದ ಬಾರಿ ತೂಕದ ವಾಹನಗಳು ಚಾರ್ಮಾಡಿ ರಸ್ತೆಯ ಮೂಲಕ ಸಂಚರಿಸುತ್ತಿದ್ದು, ಬಾರಿ ವಾಹನಗಳ ಸಂಚಾರದಿಂದ ಅಡಚಣೆಯುಂಟಾಗುತ್ತಿದೆ. ಹಾಗಾಗಿ ಬಾರಿ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಅಗತ್ಯ ವಸ್ತುಗಳ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲು ತಿಳಿಸಿದರು.

ಬಾರೀ ಮಳೆಯ ಸಂದರ್ಭದಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಿಸಲು ಕ್ರಮವಹಿಸುವಂತೆ ತಿಳಿಸಿದ ಸಚಿವರು. ದುರಸ್ಥಿಯಲ್ಲಿರುವ ಹಾಗೂ ಮಳೆಯಿಂದ ಹಾನಿಯಾಗಿರುವ ರಸ್ತೆಗಳಿಗೆ ಸಾರ್ವಜನಿಕರು ಹೋಗದಂತೆ ನಾಮಫಲಕಗಳನ್ನು ಆಳವಡಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮುಂತಾದವರು ಉಪಸ್ಥಿತರಿದ್ದರು.

Minister George instructs the authorities for quick remedial action

About Author

Leave a Reply

Your email address will not be published. Required fields are marked *

You may have missed