September 16, 2024

ಅತಿಸಣ್ಣ ರೈತರಿಗೆ ಭೂಮಿಯ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧ

0
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ಸುದ್ದಿಗೋಷ್ಠಿ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಜೀವನಕ್ಕಾಗಿ ಈಗಾಗಲೇ ಸಾಗುವಳಿ ಮಾಡಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಭೂಮಿಯ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದ್ದು ಆದರೆ ವಿಪಕ್ಷದವರ ಹೇಳಿಕೆಯಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ. ಕೆ.ಪಿ ಅಂಶುಮಂತ್ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಜೀವನೋಪಾಯಕ್ಕಾಗಿ ಬದುಕಿಗಾಗಿ ಮಾಡಿರುವ ಕೃಷಿಭೂಮಿಯಿಂದ ಜನರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬಾರದು. ಸಾಗುವಳಿದಾರರಿಗೆ ಅಡ್ಡಿಪಡಿಸಬಾರದು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷ ಜನರಿಗೆ ಭೂಮಿಯ ಹಕ್ಕು ನೀಡಿದ್ದು, ಅಧಿಕಾರ ಅನುಭವಿಸಿರುವ ಬಿಜೆಪಿ ಜನರಿಗೆ ಭೂಮಿ ಹಕ್ಕು ಕೊಡಿಸುವ ಬಗ್ಗೆ ಚಿಂತನೆ ಮಾಡಲಿಲ್ಲ, ಅದರ ಬದಲಿಗೆ ಭೂ ಕಬಳಿಕೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಒತ್ತುವರಿದಾರರನ್ನು ಭೂಗಳ್ಳರು ಎಂಬುದಾಗಿ ಬಿಂಬಿಸಲಾಗುತ್ತಿತ್ತು ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾಗದಿರುವುದರಿಂದ ಜನಪ್ರತಿನಿಧಿಗಳು ನಿರಾಸಕ್ತಿ ತೋರಿದ್ದರಿಂದ ಜಿಲ್ಲೆಯಲ್ಲಿ ಸಮಸ್ಯೆಗಳು ತಲೆದೋರಿವೆ. ಅರಣ್ಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಕೇಂದ್ರ ಸರ್ಕಾರರೊಂದಿಗೆ ಚರ್ಚಿಸಲು ಸಂಸದರು ಮುಂದಾಗುತ್ತಿಲ್ಲವೆಂದು ಟೀಕಿಸಿದರು.

ಈಗಾಗಲೇ ಬಾಕಿ ಇರುವ ನಮೂನೆ ೫೦,೫೩, ೫೭, ೯೪ಸಿ ಅಡಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಹೇಳಿದ ಅವರು ಪರಿಸರ ಮತ್ತು ರೈತರ ಬದುಕು ಉಳಿಯಬೇಕೆಂಬ ಬಗ್ಗೆ ವಾಸ್ತಾವಾಂಶಗಳು ವೈಜ್ಞಾನಿಕವಾಗಿರಬೇಕೆಂಬ ದೃಷ್ಟಿಯಿಂದ ರಾಜ್ಯಸರ್ಕಾರ ರೈತರ ನೆರವಿಗೆ ಬರಲಿದೆ ಎಂದರು.

ಕೇಂದ್ರದಲ್ಲಿ ಡಾ. ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದಾಗ ಬುಡಕಟ್ಟು ಜನರಿಗೆ ಪಾರಂಪಾರಿಕ ಅರಣ್ಯ ಹಕ್ಕನ್ನು ನೀಡಲಾಯಿತು. ಜಿಲ್ಲೆಯಲ್ಲಿರುವ ಗಂಭೀರ ವಿಷಯಗಳ ಬಗ್ಗೆ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು, ಕಂದಾಯ ಮತ್ತು ಅರಣ್ಯ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವರು ಮತ್ತು ಅರಣ್ಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆಂದು ಹೇಳಿದರು.

ಕಂದಾಯ ಮತ್ತು ಅರಣ್ಯ ಪ್ರದೇಶದ ಗಡಿ ಗುರ್ತಿಸಲು ಈಗಾಗಲೇ ಜಂಟಿ ಸರ್ವೆಗೆ ಚಾಲನೆ ನೀಡಲಾಗಿದೆ. ಅರಣ್ಯಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಮಟ್ಟದಿಂದ ಜನವಸತಿ ಪ್ರದೇಶದ ವಸ್ತುಸ್ಥಿತಿಯನ್ನು ಪರಿಗಣಿಸಿ ಗಂಭೀರ ಹೆಜ್ಜೆ ಇಡಲಾಗಿದೆ. ಪಬ್ಲಿಕ್ ಹಿಯರಿಂಗ್ ಇಲ್ಲದೆ ಅರ್ಜಿ ವಿಲೇವಾರಿ ಮಾಡದಂತೆ ಫಾರೆಸ್ಟ್ ಸಟ್ಲ್‌ಮೆಂಟ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರಿಭಾವಿತ ಅರಣ್ಯವನ್ನು ೧.೫೦ ಲಕ್ಷ ಎಕರೆಯಿಂದ ೫೫ಸಾವಿರಕ್ಕೆ ಇಳಿಸಲಾಗಿದೆ. ನಿವೇಶನ ರಹಿತರಿಗೆ ನಿವೇಶನ ಕೊಡಲು, ಸ್ಮಶಾನಕ್ಕೆ ಭೂಮಿ ಕಾಯ್ದಿರಿಸಲು, ಈಗಾಗಲೇ ಸಾಗುವಳಿ ಮಾಡಿರುವ ಸಣ್ಣ ರೈತರುಗಳಿಗೆ ಭೂಮಿ ಹಕ್ಕು ಕೊಡಿಸುವ ಪ್ರಯತ್ನ ನಡೆದಿದೆ. ಕೃಷಿ ಬದುಕಿಗಾಗಿ ಮಾಡಿರುವ ಒತ್ತುವರಿಯನ್ನು ತೆರವುಗೊಳಿಸದಂತೆ ಈಗಾಗಲೇ ಸರ್ಕಾರ ಸೂಚನೆ ನೀಡಿದೆ ಎಂದು ಹೇಳಿದರು.

ಮಾಜಿ ಸಚಿವ ಡಿ.ಎನ್.ಜೀವರಾಜ್ ಒತ್ತುವರಿಗೆ ಸಂಬಂಧಿಸಿದಂತೆ ವಿವಿಧ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳಿಗೆ ಜಿಲ್ಲೆಯ ಬನರು ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ತಾಲೂಕು ಅಧ್ಯಕ್ಷ ಮಲ್ಲೇಶ್ ಸ್ವಾಮಿ, ಹಿಂದುಳಿದ ವರ್ಗ ಜಿಲ್ಲಾಧ್ಯಕ್ಷ ಡಿ.ಸಿ.ಪುಟ್ಟೇಗೌಡ, ನಗರಸಭೆ ಸದಸ್ಯ ಮುನೀರ್ ಅಹ್ಮದ್ ಉಪಸ್ಥಿತರಿದ್ದರು.

Congress party is committed to give land rights to very small farmers

About Author

Leave a Reply

Your email address will not be published. Required fields are marked *