September 16, 2024

ಸೆಪ್ಟೆಂಬರ್ ೧೫ ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

0
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆ

ಚಿಕ್ಕಮಗಳೂರು: ಸೆಪ್ಟೆಂಬರ್ ೧೫ ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುವುದೆಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಸ್ವತಂತ್ರ ರಾಷ್ಟ್ರದಲ್ಲಿ ಸೂಕ್ತ ಸಂವಿಧಾನ ರಚಿಸಿಕೊಂಡಾಗ ಮಾತ್ರ ಉತ್ತಮ ಆಡಳಿತ ನಡೆಸಲು ಸಾಧ್ಯ ಮತ್ತು ಪ್ರಜೆಗಳೇ ಪ್ರಭುಗಳಾದಾಗ ಸ್ವತಂತ್ರ್ಯದ ಮಹತ್ವ ತಿಳಿಯಲು ಸಾಧ್ಯ ನಮ್ಮ ಸಂವಿಧಾನವು ಭಾರತದ ಪ್ರತಿಯೊಬ್ಬ ನಾಗರೀಕರಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ಧರ್ಮದ ಸ್ವಾತಂತ್ರ್ಯದ ಜೊತೆಗೆ ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರಕಿಸಿಕೊಟ್ಟಿದೆ ಎಂದರು.

ಸಂವಿಧಾನವನ್ನು ತಿಳಿದವರು ತಮ್ಮ ಹಕ್ಕು ಕರ್ತವ್ಯಗಳ ಬಗ್ಗೆ ಅರಿತು ಉತ್ತಮ ನಾಗರೀಕರಾಗಲು ಸಾಧ್ಯ. ಸಂವಿಧಾನವು ಯಾವುದೇ ಒಂದು ವರ್ಗಕ್ಕೆ ಸೀಮಿತವಾಗದೆ ಭಾರತದ ಕಟ್ಟಕಡೆಯ ವ್ಯಕ್ತಿಯ ಸ್ವಾತಂತ್ರ್ಯ, ನ್ಯಾಯ, ಸಮಾನತೆಯನ್ನು ಸಾರುತ್ತದೆ.

ಸ್ವಾತಂತ್ರ್ಯ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವವನ್ನು ತಿಳಿಸಲು ರಾಜ್ಯ ಸರ್ಕಾರವು ಸೆಪ್ಟೆಂಬರ್ ೧೫ರ ಪ್ರಜಾಪ್ರಭುತ್ವ ದಿನದಂದು ರಾಜ್ಯಾದ್ಯಂತ ಬೀದರ್‌ನಿಂದ ಚಾಮರಾಜನಗರದವರೆಗೆ ಏಕಕಾಲದಲ್ಲಿ ಮಾನವ ಸರಪಳಿ ರಚಿಸಿ ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಮಾಗಡಿ ಕೈಮರದಿಂದ ಚಿಕ್ಕಮಗಳೂರು, ಕಡೂರು, ಅಜ್ಜಂಪುರ, ಹಾಗೂ ತರೀಕೆರೆ ಮಾರ್ಗವಾಗಿ ಜಿಲ್ಲೆಯ ಗಡಿ ಭಾಗವಾದ ಎಂ.ಸಿ ಹಳ್ಳಿವರೆಗೆ ನಾಲ್ಕು ತಾಲ್ಲೂಕುಗಳ ರಾಜ್ಯ ಹೆದ್ದಾರಿಯಲ್ಲಿ ಸಂವಿಧಾನದ ಮಹತ್ವ ಸಾರುವ ವಿಶೇಷ ಮಾನವ ಸರಪಳಿಯನ್ನು ರಚಿಸಿ ಅರಿವು ಮೂಡಿಸಲು ಪ್ರತಿ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಂಡವನ್ನು ರಚಿಸಿ ಸಂಘ, ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಲಹೆ ಸೂಚನೆ ಮತ್ತು ಸಹಕಾರದೊಂದಿಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು.

ಸಂವಿಧಾನದ ಮಹತ್ವ ಸಾರುವ ಜಾಗೃತಿ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಸಂಘ, ಸಂಸ್ಥೆಗಳ ಮುಖಂಡರುಗಳು, ಶಾಲಾ-ಕಾಲೇಜು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಪ್ರಜಾಪ್ರಭುತ್ವದ ದಿನವನ್ನು ಹಬ್ಬವಾಗಿ ಆಚರಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.

ಸಭೆಯಲ್ಲಿ ಸಂಘ, ಸಂಸ್ಥೆಗಳ ಮುಖಂಡರುಗಳು ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲು ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು ಹಾಜರಿದ್ದರು.

Celebration of International Democracy Day on 15th September

About Author

Leave a Reply

Your email address will not be published. Required fields are marked *