ಎಲ್ಲ ಇಲಾಖೆಗಳ ಸಹಭಾಗಿತ್ವದೊಂದಿಗೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಿ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹಾಗೂ ಮಾರಕ ರೋಗಗಳನ್ನು ಯಶಸ್ವಿಯಾಗಿ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಹಭಾಗಿತ್ವ ಮತ್ತು ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜು ಸಿ.ಎನ್. ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿ, ನಗರ ಪ್ರದೇಶದ ಎಲ್ಲ ಮನೆ ಮನೆಗಳಿಗೂ ಭೇಟಿ ನೀಡಿ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿ ಈ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಎಲ್ಲ ಹಂತದ ಮಕ್ಕಳಿಂದ ದೊಡ್ಡವರವರೆಗೂ ಲಸಿಕೆಯನ್ನು ನೀಡುವುದರ ಮೂಲಕ ದಢಾರ ಮತ್ತು ರುಬೆಲ್ಲಾ, ಚಿಕನ್ಗುನ್ಯ, ಮಲೇರಿಯಾದಂತ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಈ ರೋಗಗಳು ಬಾರದಂತೆ ತಡೆಗಟ್ಟಲು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಸ್ಥಳೀಯ ಮಟ್ಟದಲ್ಲಿರುವ ಅಧಿಕಾರಿಗಳು ಈ ಬಗ್ಗೆ ಮುನ್ನಚ್ಚರಿಕೆಯನ್ನು ವಹಿಸಿ ಶಾಲಾ, ಕಾಲೇಜ್, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಜಾಗೃತಿ ಜೊತೆಗೆ ಇಂದ್ರ ಧನುಷ್ನ ಬಗ್ಗೆ ತಿಳುವಳಿಕೆ ಮೂಡಿಸಬೇಕು.
ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಶುಚಿಯಾಗಿ ಇಟ್ಟುಕೊಳ್ಳುವತ್ತ ಗಮನ ಹರಿಸಬೇಕು ಪ್ಲಾಂಟೇಷನ್ ಹಾಗೂ ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರ ಮಕ್ಕಳಿಗೂ ಲಸಿಕೆ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಗೋಪಾಲಕೃಷ್ಣ ಅವರು ಮಾತನಾಡಿ ಜಿಲ್ಲೆಯ ಎಲ್ಲ ತಾಲ್ಲೂಕು ಆರೋಗ್ಯಾಧಿಕಾರಿಗಳು ಆರೋಗ್ಯ ಕೇಂದ್ರಗಳ ಮೂಲಭೂತ ಸೌಕರ್ಯಗಳು ಹಾಗೂ ಕಟ್ಟಡ ಸುವ್ಯವಸ್ಥೆ ಮತ್ತು ಸ್ಥಳ ದಾಖಲಾತಿಗಳನ್ನು ಸುವ್ಯವಸ್ಥಿತವಾಗಿ ಇಟ್ಟಕೊಳ್ಳಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ತಾಲ್ಲೂಕ್ ಆರೋಗ್ಯ ಅಧಿಕಾರಿಗಳು ಕಾಯಕಲ್ಪ ಯೋಜನೆಯಡಿಯಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
District Level Task Force Committee Meeting of Health and Family Welfare Department