ಮೂರು ಎಫ್ಐಆರ್ಗೆ ತಡೆಯಾಜ್ಞೆ -ವಕೀಲರ ಸಂಭ್ರಮಾಚರಣೆ
ಚಿಕ್ಕಮಗಳೂರು: ವಕೀಲರ ಮೇಲೆ ಪೊಲೀಸರು ದಾಖಲಿಸಿದ್ದ ನಾಲ್ಕು ಎಫ್ಐಆರ್ಗಳ ಪೈಕಿ ಮೂರು ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ವಕೀಲರರು ಜಿಲ್ಲಾ ನ್ಯಾಯಾಲಯದ ಹೊರಭಾಗದಲ್ಲಿ ಸೋಮವಾರ ಸಂಜೆ ಸಂಭ್ರಮಾಚರಣೆ ನಡೆಸಿದರು.
ಪೊಲೀಸ್ ಹಾಗೂ ವಕೀಲರ ಗಲಾಟೆ ಪ್ರಕರಣದಲ್ಲಿ ವಕೀಲರ ಮೇಲೆ ದಾಖಲಾಗಿದ್ದ ೪ ಎಫ್ಐಆರ್ ಗೆ ಉಚ್ಚನ್ಯಾಯಾಲ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಮಗಳೂರಿನ ಕೋರ್ಟ್ ಆವರಣದಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಮೂರು ಎಫ್ಐಆರ್ಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ವಕೀಲರು ಮೇಲುಗೈ ಸಾಧಿಸಿದಂತಾಗಿದೆ.
ವಕೀಲರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಠಾಣೆಯೊಳಗೆ ಅಕ್ರಮ ಪ್ರವೇಶ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ತಮ್ಮ ಕುಟುಂಬದವರೊಂದಿಗೆ ಸೇರಿ ಚಿಕ್ಕಮಗಳೂರಿನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ವಕೀಲರ ವಿರುದ್ಧ ನಾಲ್ಕು ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಾಗಿ ಎರಡು ದಿನ ಕಳೆಯುವುದರೊಳಗಾಗಿ ಹೈಕೋರ್ಟ್ ಮೂರು ಪ್ರಕರಣಗಳಿಗೆ ತಡೆಯಾಜ್ಞೆ ನೀಡಿದ್ದರಿಂದಾಗಿ ವಕೀಲರು ನಿಟ್ಟುಸಿರು ಬಿಡುವಂತಾಗಿದೆ.
ಮೂರು ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡುತ್ತಿದ್ದಂತೆ ಕೋರ್ಟ್ ಎದುರು ಸೇರಿದ ವಕೀಲರು ಇದು ನಮಗೆ ಸಂದ ಮೊದಲ ಜಯ ಎಂದು ಸಂಭ್ರಮಿಸಿದರು. ಶಿವಮೊಗ್ಗ, ಹಾಸನ, ಮಂಗಳೂರು, ಉಡುಪಿಯಿಂದ ಬಂದಿದ್ದ ವಕೀಲರೂ ಸಹ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.
ಪೊಲೀಸರು ತಮ್ಮ ಕರ್ತವ್ಯ ಮರೆತಿದ್ದಾರೆ ಜೊತೆಗೆ ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಪೊಲೀಸರು ಒತ್ತಾಯಿಸಿದ್ದಾರೆ.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಸುಧಾಕರ್ ಮಾತನಾಡಿ ವಕೀಲರ ಮೇಲೆ ದಾಖಲಾಗಿದ್ದ ನಾಲ್ಕು ಪ್ರಕರಣಗಳಲ್ಲಿ ಮೂರು ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದು ನಮ್ಮ ಹೋರಾಟಕ್ಕೆ ಸಂದ ಮೊದಲ ಜಯ. ಮಂಗಳವಾರ ವಕೀಲರ ಮೇಲೆ ಹಲ್ಲೆ ಪ್ರಕರಣದ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಲಿದೆ. ನಾವು ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಕೋರ್ಟ್ ಕಲಾಪಗಳಲ್ಲಿ ಭಾಗಿಯಾಗುತ್ತಿದ್ದೇವೆ. ನಾಳೆ ಹೈಕೋರ್ಟ್ ವಿಚಾರಣೆ ಬಳಿಕ ಮುಂದೇನು ಮಾಡಬೇಕು ಎಂಬ ಬಗ್ಗೆ ತೀರ್ಮಾನಿಸುತ್ತೇವೆ ಎಂದರು
Lawyers celebrate in court