ಇಂದು ಜಾನಪದ ಜನಮಾನಸದಿಂದ ದೂರವಾಗುತ್ತಿದೆ
ಚಿಕ್ಕಮಗಳೂರು: ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಹೆತ್ತವರು ತಮ್ಮ ಮಕ್ಕಳಿಗೆ ಮನೆಯಲ್ಲೇ ಅವುಗಳನ್ನು ಕಲಿಸುವ ಕೆಲಸ ಮಾಡಬೇಕು ಎಂದು ಹಿರಿಯ ವೀರಗಾಸೆ ಕಲಾವಿದ ಡಾ. ಮಾಳೇನಹಳ್ಳಿ ಬಸಪ್ಪ ಹೇಳಿದರು.
ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಅಜ್ಜಂಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಜಾನಪದ ಕಲೆಗಳ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಆಧುನಿಕತೆಯ ಅಬ್ಬರ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಮಿತಿಮೀರಿದ ವ್ಯಾಮೋಹದಿಂದಾಗಿ ಭಾರತೀಯ ಸಂಸ್ಕೃತಿಯ ತಾಯಿ ಬೇರಾದ ಜಾನಪದವಿಂದು ಜನಮಾನಸದಿಂದ ದೂರ ವಾಗುತ್ತಿದೆ ಎಂದು ವಿಷಾದಿಸಿದರು.
ಹೆತ್ತವರು ಮತ್ತು ಶಿಕ್ಷಕರು ಪಠ್ಯದ ಜೊತೆಗೆ ಮಕ್ಕಳಿಗೆ ಎಳೆಯ ವಯಸ್ಸಿನಿಂದಲೇ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಕಲಿಸುವ ಕೆಲಸ ಮಾಡಿದರೆ ಮಾತ್ರ ಅದು ಉಳಿಯು ವುದರ ಜೊತೆಗೆ ಬೆಳೆಯುತ್ತದೆ ಎಂದು ಕಿವಿ ಮಾತು ಹೇಳಿದರು.
ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ್ ಶಿವಶರಣಪ್ಪ ಕಟ್ಟೋಳಿ, ಅಳಿವಿನಂಚಿನಲ್ಲಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಾಗಾರಗಳು ಹೆಚ್ಚು ನಡೆಯಬೇಕು ಎಂದು ಸಲಹೆ ಮಾಡಿದರು.
ಜಾನಪದ ನಮ್ಮ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅಡಿಗಲ್ಲಾಗಿದ್ಧು ಅದನ್ನು ಎಲ್ಲರೂ ಜತನದಿಂದ ಕಾಪಾಡಬೇಕು ಎಂದು ಹೇಳಿದರು.
ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಮಾತನಾಡಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪರಿಷತ್ತಿನಿಂದ ಜಿಲ್ಲಾಧ್ಯಂತ ಜಾನಪದ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಶಾಲಾ, ಕಾಲೇಜು ಮತ್ತು ಹೋಬಳಿಗಳಲ್ಲೂ ಜಾನಪದ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುವುದು ಎಂದರು.
ರಂಗ ಸಂಘಟಕ ಎ.ಸಿ.ಚಂದ್ರಪ್ಪ ಮಾತನಾಡಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಅವುಗಳನ್ನು ಪಠ್ಯದಲ್ಲಿ ಅಳವಡಿಸಬೇಕು ಎಂದು ಒತ್ತಾಯಿಸಿದರು
.ಹಿರಿಯ ಕಲಾವಿದೆ ಮುಗುಳಿ ಲಕ್ಷ್ಮೀದೇವಮ್ಮ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷ ಜಿ.ತಿಪ್ಪೇಶ್, ಸಂಘಟಕ ಚಿಕ್ಕನಲ್ಲೂರು ಜಯಣ್ಣ, ಮರುಳಸಿದ್ದಪ್ಪ, ತರೀಕೆರೆ ತಾಲೂಕು ಅಧ್ಯಕ್ಷ ಆರ್.ನಾಗೇಶ್, ಕಡೂರು ತಾಲೂಕು ಅಧ್ಯಕ್ಷ ಜಗದೀಶ್ವರಾಚಾರ್, ತ್ಯಾಗದಕಟ್ಟೆ ಪ್ರಕಾಶ್, ಕುಂಕನಾಡು ನಾಗರಾಜ್, ಓಂಕಾರಪ್ಪ, ಬಸವರಾಜ್, ಸಿದ್ದರಾಮಪ್ಪ, ಉಪನ್ಯಾಸಕ ಆನಂದ್ ಉಪಸ್ಥಿತರಿದ್ದರು.
೩೦೦ಕ್ಕೂ ಹೆಚ್ಚು ಕಲಾವಿದರು ಕಾರ್ಯಾಗಾರದಲ್ಲಿ ಪಾಲ್ಗೊಂಡು ತರಬೇತಿ ಪಡೆದರು. ಜಾನಪದ ಗಾಯನ, ನೃತ್ಯ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲೆಗಳ ಬಗ್ಗೆ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಯಿತು
Folk Arts Training Workshop