ಡಾ.ಕೆ.ಪಿ.ಅಂಶುಮಂತ್ ಗೆ ಎಂ.ಪಿ ಟಿಕೆಟ್ ನೀಡಲು ಕಾಂಗ್ರೆಸ್ ಒತ್ತಾಯ
ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ,ಪಿ.ಅಂಶುಮಂತ್ ಅವರಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಅವರು ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಜಿಲ್ಲೆಯ ಬಹುತೇಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷರಾದ ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಟಿಕೆಟ್ ನೀಡಲು ಒತ್ತಾಯಿಸಿರುವುದಾಗಿ ಮಂಜೇಗೌಡ ತಿಳಿಸಿದ್ದು, ರಾಜ್ಯದಿಂದ ದೆಹಲಿಗೆ ಕಳುಹಿಸಿರುವ ಪಟ್ಟಿಯಲ್ಲಿ ಡಾ.ಕೆ.ಪಿ.ಅಂಶುಮಂತ್ ಅವರ ಹೆಸರು ಸೇರಿರುವುದು ಸ್ವಾಗತಾರ್ಹವಾಗಿದೆ ಎಂದಿದ್ದಾರೆ.
ಕಳೆದ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೋವಿಡ್ ಸಂದರ್ಭದಲ್ಲೂ ಕೂಡ ಪಕ್ಷವು ಸಾರ್ವಜನಿಕರ ಸಹಕಾರಕ್ಕೆ ಸದಾ ಮುಂದಾಗುವಂತೆ ನಾಯಕತ್ವ ನೀಡಿದ, ಅವರ ನೇತೃತ್ವದಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲು ಸಾಧ್ಯವಾಯಿತು.
ಕಳೆದ ೫೦ ವರ್ಷಗಳಿಂದ ನೆನೆಗುದಿಗೆ ಬಿದ್ದದ್ದ ಕಾಂಗ್ರೆಸ್ ಭವನ ಕೂಡ ಇವರ ಕಾಲದಲ್ಲಿ ಆರಂಭವಾಗಿದೆ ಎಂಬುದನ್ನು ನೆನಪಿಸಿರುವ ಮಂಜೇಗೌಡ ಅವರು ಸದಾ ಸಕ್ರೀಯರಾಗಿರುವ ಯುವಕ, ಆರ್ಥಿಕ ಸದೃಡತೆ ಹೊಂದಿರುವ ಡಾ.ಕೆ.ಪಿ.ಅಂಶುಮಂತ್ ಅವರಿಗೆ ಲೋಕಸಭಾ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
Congress insists on giving MP ticket to Dr. KP Anshumant