ಕಲುಷಿತವಾಗದಿರಲಿ ನಮ್ಮ ಜಲ ಉಳಿಸಿ ಮನುಕುಲ ಎಂಬ ಅಭಿಯಾನಕ್ಕೆ ಚಾಲನೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನಚ್ಚರಿಕೆ ಕ್ರಮವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಲುಷಿತವಾಗದಿರಲಿ ನಮ್ಮ ಜಲ ಉಳಿಸಿ ಮನುಕುಲ ಎಂಬ ಘೋಷಣೆಯೊಂದಿಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ. ಬಿ ಗೋಪಾಲಕೃಷ್ಣ ತಿಳಿಸಿದರು.
ಅವರು ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ ಕಲುಷಿತವಾಗದಿರಲಿ ನಮ್ಮ ಜಲ. ಉಳಿಸಿ ಮನುಕುಲ ಎಂಬ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯ ಗ್ರಾಮಸ್ಥರಿಗೆ ಅರಿವು ಮೂಡಿಸಲು ಹಾಗೂ ನೀರಿನ ಮೂಲಕಗಳನ್ನು ಸ್ವಚ್ಚವಾಗಿಡಲು ಟ್ಯಾಂಕ್ಗಳನ್ನು ಸ್ವಚ್ಚವಾಗಿಟ್ಟುಕೊಂಡು ನೀರಿನ ಮಿತಿ ಬಳಕೆ ಮಾಡುವ ಕುರಿತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಅರಿವು ಮೂಡಿಸಲು ಈ ಅಭಿಯಾನ ಸಹಕಾರಿಯಾಗಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ೮ ತಾಲೂಕುಗಳನ್ನು ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದು, ಇದರಿಂದಾಗಿ ಜಿಲ್ಲೆಯಾದ್ಯಂತ ೩೭೯ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉದ್ಭವಿಸಬಹುದೆಂದು ಅಂದಾಜಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು ೧೭ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ ೨೧ ಗ್ರಾಮಗಳಿಗೆ ಖಾಸಗಿ ಬೋರ್ವೆಲ್ ಮೂಲಕ ನೀರನ್ನು ಪೂರೈಕೆ ಮಾಡಲಾಗುತ್ತಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಈ ಸಹಾಯವಾಣಿ ಸಂಖ್ಯೆ ೦೮೨೬೨ ೨೨೯೫೭೯೫ ಗೆ ಕೆರೆ ಮಾಡಿ ದೂರು ಸಲ್ಲಿಸುವಂತೆ ಮನವಿ ಮಾಡಿದರು.
ಸಹಾಯವಾಣಿಗೆ ಕರೆ ಬಂದಂತಹ ಚಿಕ್ಕಮಗಳೂರು ತಾಲೂಕಿನ ಮಳಲೂರು ಗ್ರಾಮದ ಕರೆಯನ್ನು ಸ್ವೀಕರಿಸಿ ಸಮಸ್ಯೆಯನ್ನು ಆಲಿಸಿದ ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸುವಂತೆ ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆಗೆ ತುರ್ತಾಗಿ ಸ್ಪಂಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಈ ಸಂಬಂಧ ನಡೆದ ಸಭೆಯಲ್ಲಿ ನೀರಿನ ಸಮಸ್ಯೆ ನಿವಾರಣೆಗಾಗಿ ಸಮಗ್ರ ಮಾಹಿತಿ ಪಡೆದುಕೊಂಡು ಅಧಿಕಾರಿಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗೆ ಸ್ಪಂಧಿಸುವಂತೆ ಆದೇಶಿಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ವಿನಾಯಕ್, ಕಡೂರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಮತ್ತಿತರರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Let’s not pollute our water. Launch of the campaign ‘Save Mankind’