ಗ್ರಾಹಕರು ವಸ್ತು ಖರೀದಿಸುವಾಗ ಎಚ್ಚರದಿಂದರಬೇಕು
ಚಿಕ್ಕಮಗಳೂರು: ಗ್ರಾಹಕರು ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಿ ಖರೀದಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ಆರ್. ಚನ್ನಕೇಶವ ತಿಳಿಸಿದರು.
ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಶ್ರೀ ಶಾರದಾ ಸ್ಕೂಲ್ ಆಫ್ ಲಾ ಕಾಲೇಜ್ ಇವರ ವತಿಯಿಂದ ಇಂದು ನಗರದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಶಾರದಾ ಸ್ಕೂಲ್ ಆಫ್ ಲಾ ಕಾಲೇಜ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರಥಮ ಪ್ರಜೆಯಿಂದ ಸಾಮಾನ್ಯ ಪ್ರಜೆಯ ವರೆಗೂ ಎಲ್ಲರು ಗ್ರಾಹಕರಾಗಿರುತ್ತಾರೆ. ಗ್ರಾಹಕರಾದವರು ಖರೀದಿಯಲ್ಲಿ ಮತ್ತು ವ್ಯವಹಾರಗಳಲ್ಲಿ ತಮಗಾಗುವ ತೊಂದರೆಗಳನ್ನು ಗ್ರಾಹಕರ ಆಯೋಗದ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಅನ್ಯಾಯವಾದಾಗ ಅದನ್ನು ಕಡೆಗಣಿಸದೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ನ್ಯಾಯ ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದ ಅವರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆರಾದ ಪ್ರೇಮ ಇ. ಮಾತನಾಡಿ ಗ್ರಾಹಕರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯತೆ ಇದೆ. ಇಂದು ಆನ್ ಲೈನ್ ಸೇವೆಯನ್ನು ಈ ವ್ಯಾಪ್ತಿಗೆ ತರಲಾಗಿದೆ. ಆನ್ ಲೈನ್ ಖರೀದಿಯಲ್ಲಿ ಗ್ರಾಹಕರು ಹೆಚ್ಚು ವಂಚನೆಗೆ ಒಳಗಾಗುತ್ತಾರೆ. ಹೀಗೆ ಮೋಸಕ್ಕೆ ಒಳಗಾದ ಗ್ರಾಹಕರು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿ ಪರಿಹಾರ ಪಡೆಯಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮ ಎ.ಎಸ್. ಮಾತನಾಡಿ ಪ್ರತಿ ವರ್ಷ ಮಾರ್ಚ್ ೧೫ ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಣೆ ಮಾಡಲಾಗುತ್ತದೆ. ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ದಿನವನ್ನು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದ್ದು, ಭಾರತದಲ್ಲಿ ಗ್ರಾಹಕರ ಕುಂದು ಕೊರತೆಯನ್ನು ರಾಷ್ಟ್ರೀಯ ಗ್ರಾಹಕರ ವಿವಾದಗಳ ಪರಿಹಾರ ಆಯೋಗವು ಪರಿಹರಿಸುತ್ತದೆ ಎಂದು ತಿಳಿಸಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಯೋಗಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಸ್ಕೂಲ್ ಆಫ್ ಲಾ ಕಾಲೇಜಿನ ಪ್ರಾಂಶುಪಾಲರಾದ ಸೈಯದ್ ನಯೀಂ ಉರ್ ರೆಹಮಾನ್ ಮುಂತಾದವರಿದ್ದರು.
World Consumer Day Program