September 20, 2024

ವಿದ್ಯಾರ್ಥಿಗಳು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು

0
ಎಐಟಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮ

ಎಐಟಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮ

ಚಿಕ್ಕಮಗಳೂರು: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಮುಂದಿನ ಆರು ವರ್ಷಗಳ ಕಾಲ ತಮ್ಮ ಎಲ್ಲಾ ಅಭಿಲಾಷೆಗಳನ್ನೂ ಬದಿಗಿಟ್ಟು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು ಎಂದು ಶಾಸಕ ಎಚ್. ಡಿ. ತಮ್ಮಯ್ಯ ಸಲಹೆ ಮಾಡಿದರು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘ, ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ನಂತರದ ಉನ್ನತ ಶಿಕ್ಷಣದಅ ಆರು ವರ್ಷಗಳ ಸಮಯ ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖವಾದ ಘಟ್ಟ, ಆ ಕಾಲ ನಮ್ಮ ಬದುಕನ್ನು ರೂಪಿಸುವ ಕಾಲ, ಆ ಸಂದರ್ಭದಲ್ಲಿ ನಾವು ಆಕರ್ಷಣೆಗಳಿಗೆ ಒಳಗಾಗಿ ಅತ್ತಿತ್ತ ಹೊರಳಿದರೆ ಬದುಕು ಹಾದಿ ತಪ್ಪುತ್ತದೆ ನಮ್ಮ ಗುರಿಯನ್ನು ತಲುಪಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದರು.

ವಿದ್ಯಾರ್ಥಿಗಳಿಗೆ ಬಹಳಷ್ಟು ಅಭಿಲಾಷೆಗಳಿರುತ್ತವೆ ಅವುಗಳನ್ನು ಪೂರೈಸಿಕೊಳ್ಳುವ ಸಮಯ ವಿದ್ಯಾರ್ಥಿ ದೆಸೆಯಲ್ಲ, ಉನ್ನತ ಶಿಕ್ಷಣ ಮುಗಿದ ನಂತರ ಅವುಗಳನ್ನು ಈಡೇರಿಸಿಕೊಳ್ಳಬಹುದು ಹಾಗಾಗಿ ವಿದ್ಯಾರ್ಥಿಗಳು ಶ್ರದ್ದೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಬದುಕಿನಲ್ಲಿ ನೆಲೆ ನಿಂತ ನಂತರ ಹೆತ್ತವರನ್ನು ಯಾವುದೇ ಕಾರಣಕ್ಕೂ ಮರೆಯಬಾರದು ನಾವು ಈ ಮಟ್ಟಕ್ಕೆ ಬರಲು ಹೆತ್ತವರ ತ್ಯಾಗ, ಪರಿಶ್ರಮ ಕಾರಣ ಎಂಬುದನ್ನು ಅರಿತು ಅವರನ್ನು ಸಾಕಿ ಸಲಹಬೇಕು ಎಂದು ತಿಳಿಸಿದರು.

ಎ ಐ ಟಿ ಪ್ರಾಂಶುಪಾಲ ಡಾ, ಸಿ. ಟಿ. ಜಯದೇವ್ ಮಾತನಾಡಿ ಇದು ಜ್ಞಾನದ ಯುಗ, ಈ ಜಗತ್ತಿನಲ್ಲಿ ಜ್ಞಾನಕ್ಕೆ ಮಾತ್ರ ಬೆಲೆ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಬೇಕು, ಬರೀ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಎಲ್ಲಾ ಕ್ಷೇತ್ರಗಳಲ್ಲೂ ಎಲ್ಲಾ ವಿಷಯಗಳಲ್ಲೂ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಕೌಶಲ್ಯವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ವೇಳೆ ಪೋಷಕರ ಆರ್ಥಿಕ ಶಕ್ತಿ ಯನ್ನು ಅವರ ಪರಿಸ್ಥಿತಿಯನ್ನೂ ಅರ್ಥ ಮಾಡಿಕೊಳ್ಳಬೇಕು, ಆತ್ಮವಿಶ್ವಾಸ ಶ್ರದ್ಧೆ ಪರಿಶ್ರಮವನ್ನು ಮೈಗೂಡಿಸಿಕೊಳ್ಳಬೇಕು, ವಿದ್ಯಾವಂತರಾಗುವುದರ ಜೊತೆಗೆ ವಿನಯವಂತರೂ ಆಗಬೇಕು ಎಂದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಮಾತನಾಡಿ ಕಳೆದ ೫ ವರ್ಷದ ಅವಧಿಯಲ್ಲಿ ಸಂಘದಿಂದ ಜಿಲ್ಲೆಯ ಒಂದೂವರೆ ಸಾವಿರಕ್ಕೂ ಅಧಿಕ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗಿದೆ, ಜಿಲ್ಲಾ ಸರಕಾರಿ ನೌಕರರ ಸಂಘ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿರುವ ಜಿಲ್ಲಾ ಸರ್ಕಾರಿ ನೌಕರರ ೨೪೪ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಮಂಜುನಾಥ ಸ್ವಾಮಿ ಕಾರ್ಯದರ್ಶಿ ಎ. ಎಸ್. ದರ್ಶನ್ ಉಪಾಧ್ಯಕ್ಷ ಹೆಚ್. ಆರ್. ಶಿವಕುಮಾರ್ ಖಜಾಂಚಿ ಡಾ. ಜಗದೀಶ್. ರಾಜ್ಯ ಪರಿಷತ್ ಸದಸ್ಯ ಎಸ್. ಟಿ. ಪೂರ್ಣೇಶ್, ದೇವಾನಂದ್, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಪದ್ಮರಾಜ್, ಅಜ್ಜಂಪುರ ತಾಲೂಕು ಅಧ್ಯಕ್ಷ ಈಶ್ವರಪ್ಪ, ಶೃಂಗೇರಿ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಬಿ ಇ ಒ ಹೇಮಚಂದ್ರ ಉಪಸ್ಥಿತರಿದ್ದರು.

Congratulation program for students who scored high marks in AIT college hall

About Author

Leave a Reply

Your email address will not be published. Required fields are marked *