September 19, 2024

ಸಾರ್ವಜನಿಕರಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಿ

0
ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಯೋಜನೆಯ ಸಭೆ

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಯೋಜನೆಯ ಸಭೆ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯ ಮೂಲಕ ಬಡಿಗ, ದೋಣಿ ತಯಾರಿಕೆ, ಕುಂಬಾರರು, ಅಕ್ಕಸಾಲಿಗ, ಕಮ್ಮಾರರು, ಶಿಲ್ಪಿಗಳು, ಮಾಲಾಕಾರರು ಸೇರಿದಂತೆ ವಿವಿಧ ಸಾಂಪ್ರದಾಯಿಕ ಕಸುಬುದಾರರು ಹಾಗೂ ಕರಕುಶಲ ಕರ್ಮಿಗಳ ಕೈ ಬಲಪಡಿಸುವುದರೊಂದಿಗೆ ಭಾರತದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಯೋಜನೆಯ ಪಾತ್ರ ಮಹತ್ವದ್ದಾಗಿದೆ.

ಇದರೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ, ಸ್ಟಾಟ್ ಅಪ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಮತ್ತು ವಿವಿಧ ಯೋಜನೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಉದ್ಯಮದಾರರಿಗೆ ಅವರ ಜೀವನ ಮಟ್ಟ ಸುಧಾರಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದರು.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಅನುಮೋದನೆಗೊಂಡ ಅರ್ಹ ಅಭ್ಯರ್ಥಿಗಳಿಗೆ ಅವರ ಐಚ್ಛಿಕ ವಿಷಯದಲ್ಲಿ ೭ ದಿನಗಳ ಗುಣಮಟ್ಟ ತರಬೇತಿ ನೀಡಲಾಗುತ್ತದೆ. ತರಬೇತಿ ಸಂದರ್ಭದಲ್ಲಿ ೫೦೦ ರೂ ಗಳ ಸ್ಟೈಫಂಡ್ ಹಾಗೂ ತರಬೇತಿ ನಂತರದಲ್ಲಿ ರೂ. ೧೫,೦೦೦ ವೆಚ್ಚದ ಉಚಿತ ಟೂಲ್ ಕಿಟ್ ಒದಗಿಸಿ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

ನಂತರದಲ್ಲಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಲ್ಲಿ ಮೊದಲನೇ ಹಂತದ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಶೇಕಡ ೫ ರಷ್ಟು ಬಡ್ಡಿ ದರದಲ್ಲಿ ಒಂದು ಲಕ್ಷ ರೂಗಳ ಸಾಲ ಸೌಲಭ್ಯ ನೀಡಲಾಗುತ್ತದೆ ಮತ್ತು ಮುಂದಿನ ಹಂತದ ತರಬೇತಿ ನಂತರದಲ್ಲಿ ಹೆಚ್ಚಿನ ಸಾಲ ಒದಗಿಸಿ ಕೊಡುವ ಮಹತ್ವದ ಯೋಜನೆಯಾಗಿದೆ.

ಕೇಂದ್ರ ಸರ್ಕಾರದ ಅನೇಕ ಯೋಜನೆಗಳು ಬಡ ಕುಶಲ ಕರ್ಮಿಗಳು ಹಾಗೂ ನಿರುದ್ಯೋಗಿಗಳು ತಮ್ಮ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದ ಅವರು ಪ್ರತಿಯೊಬ್ಬರಿಗೂ ಯೋಜನೆಯ ಅರಿವು ಮೂಡಿಸಿ ಅರ್ಹರು ಯೋಜನೆಗಳ ಫಲ ಪಡೆದುಕೊಳ್ಳುವಂತೆ ಕ್ರಮವಹಿಸಿ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ ಮಾತನಾಡಿ ಜಿಲ್ಲೆಯಲ್ಲಿ ಪಿ.ಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಒಟ್ಟು ೩೪೧೬೪ ಅರ್ಜಿಗಳು ಸ್ವೀಕೃತವಾಗಿದ್ದು ೬೦೦೩ ಅಭ್ಯರ್ಥಿಗಳ ತರಬೇತಿಗೆ ರಾಜ್ಯಮಟ್ಟದಿಂದ ಅನುಮೋದನೆ ಬಂದಿದೆ. ಇವುಗಳಲ್ಲಿ ೨೧೮೬ ಅಭ್ಯರ್ಥಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ತಿರಸ್ಕೃತಗೊಂಡ ಅರ್ಜಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಒಟ್ಟು ೧೧ ತರಬೇತಿ ಕೇಂದ್ರಗಳಿದ್ದು ಸದ್ಯ ೪ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಸಣ್ಣ ಪುಟ್ಟ ತಾಂತ್ರಿಕ ದೋಷಗಳಿಂದ ಉಳಿದ ತರಬೇತಿ ಕೇಂದ್ರಗಳಲ್ಲಿ ತರಬೇತಿ ನೀಡಲು ವಿಳಂಬವಾಗಿದ್ದು, ಶೀಘ್ರದಲ್ಲೆ ತರಬೇತಿ ಪ್ರಾರಂಭಿಸಲಾಗುವುದು ಎಂದರು. ತರಬೇತಿ ಪಡೆದ ೨೧೮೬ ಅಭ್ಯರ್ಥಿಗಳಲ್ಲಿ ೧೦೬೦ ಅಭ್ಯರ್ಥಿಗಳು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದು, ೫೦೧ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲಿಸಿ ಅನುಮೋದನೆಗೊಳಿಸಿ ಕೆಲವರ ಖಾತೆಗೆ ಹಣ ಜಮೆ ಮಾಡಲಾಗಿದೆ ಎಂದ ಅವರು ಉಳಿದ ಅರ್ಹ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ಸಾಲ ದೊರಕಿಸಿ ಕೊಡಲು ಅಧಿಕಾರಿಗಳಿಗೆ ಕ್ರಮವಹಿಸಲು ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಹೆಚ್.ಸಿ, ಜಂಟಿ ನಿರ್ದೇಶಕ ಮಹೇಶ್ ಕುಮಾರ್, ಜಿಲ್ಲಾ ಕೈಗಾರಿಕಾ ಕೇಂದ್ರ ಉಪನಿರ್ದೇಶಕ ಚಂದ್ರಶೇಖರ್, ಕೈಗಾರಿಕಾ ಇಲಾಖೆ ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಮ್ಲುರುಡಪ್ಪ ಸೇರಿದಂತೆ ವಿಶ್ವಕರ್ಮ ಯೋಜನೆ ಸಲಹಾ ಸಮಿತಿ ಸದಸ್ಯರು ಹಾಗೂ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ವ್ಯವಸ್ಥಾಪಕರು ಹಾಜರಿದ್ದರು.

Vishwakarma Yojana meeting held at Zilla Panchayat Mini Hall

About Author

Leave a Reply

Your email address will not be published. Required fields are marked *

You may have missed